ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಸಭೆ

ಗಡಿ ಸಮಸ್ಯೆ - ಅಹವಾಲು ಸ್ವೀಕರಿಸಲು ಬೆಳಗಾವಿಯಲ್ಲಿ ಶೀಘ್ರವೇ ಗಡಿ ಆಯೋಗದ ಕಚೇರಿ ಸ್ಥಾಪನೆ: ಶಿವರಾಜ್ ಪಾಟೀಲ

WhatsApp Group Join Now
Telegram Group Join Now

ಬೆಳಗಾವಿ: ಸಾರ್ವಜನಿಕರು, ಕನ್ನಡಪರ ಸಂಘಟನೆಗಳ ಬೇಡಿಕೆಯಂತೆ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಗಡಿ ಆಯೋಗದ ಕಚೇರಿಯೊಂದನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಶಿವರಾಜ್ ಪಾಟೀಲ ತಿಳಿಸಿದರು.

 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿ ಮತ್ತು ನದಿಗಳ ಆಯೋಗಕ್ಕೆ ಸುವರ್ಣ ವಿಧಾನಸೌಧದಲ್ಲಿ ಎರಡು ಕೊಠಡಿಗಳನ್ನು ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸದರಿ ಆಯೋಗವನ್ನು ಪುನರ್ ರಚನೆಗೆ ಕ್ರಮ ಕೈಗೊಂಡು ಶೀಘ್ರವೇ ಸುವರ್ಣ ಸೌಧದಲ್ಲಿ ಕಚೇರಿ ಸ್ಥಾಪಿಸಿ ಕಚೇರಿಗೆ ಆಯೋಗದ ಸ್ಥಳೀಯ ಸದಸ್ಯರೊಬ್ಬರನ್ನು ನಿಯೋಜಿಸುವ ಮೂಲಕ ಸ್ಥಳೀಯ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಜನರ, ಸಂಘ – ಸಂಸ್ಥೆಗಳ ಅಹವಾಲುಗಳನ್ನು ಸ್ವೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

 

ಗಡಿ ಸಮಸ್ಯೆಗಳನ್ನು ಸಂವಿಧಾನಾತ್ಮಕವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ನಡೆದಿರುತ್ತವೆ. ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ಪಟ್ಟಿಯಾದ ಬಳಿಕ ಸಮರ್ಥವಾಗಿ ವಾದ ಮಂಡನೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗಡಿ ಸಮಸ್ಯೆಗಳನ್ನು ಸಂವಿಧಾನಾತ್ಮಕವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ನಡೆದಿರುತ್ತವೆ. ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ಪಟ್ಟಿಯಾದ ಬಳಿಕ ಸಮರ್ಥವಾಗಿ ವಾದ ಮಂಡನೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

 

ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಹೋರಾಟಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಲಹೆಗಳು ಮತ್ತು ಹಕ್ಕೊತ್ತಾಯಗಳನ್ನು ಸರ್ಕಾರದ ಗಮನಕ್ಕೆ ತರುವ ಮೂಲಕ ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಮಹಾರಾಷ್ಟ್ರ ಮಾದರಿಯಲ್ಲಿ ಗಡಿ ಸಚಿವರನ್ನು ನೇಮಕ ಮಾಡುವ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಶಿವರಾಜ್ ಪಾಟೀಲ ಭರವಸೆ ನೀಡಿದರು.

 

ನದಿಗಳು ಮತ್ತು ಗಡಿಗಳ ಸಮಸ್ಯೆ ಎದುರಾದಾಗ ಕಾನೂನಾತ್ಮಕವಾಗಿ ಯಾವ ರೀತಿಯಲ್ಲಿ ರಕ್ಷಣೆ ಮಾಡಬೇಕು ಎಂಬುದನ್ನು ಸರ್ಕಾರಕ್ಕೆ ಸಲಹೆ ರೂಪದಲ್ಲಿ ವರದಿ ನೀಡುವ ಕೆಲಸವನ್ನು ಆಯೋಗ ಮಾಡಲಿದೆ ಎಂದು ಶಿವರಾಜ ಪಾಟೀಲ ಹೇಳಿದರು. ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ರಾಜ್ಯೋತ್ಸವ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಆಚರಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ದೊರಕಿಸಲು ಶಿಫಾರಸು ಮಾಡಲಾಗುವುದು ಎಂದು ಶಿವರಾಜ್​ ಪಾಟೀಲ ತಿಳಿಸಿದರು.

 

ಸಭೆಯಲ್ಲಿ ಮಾತನಾಡಿದ ಕನ್ನಡ ಪರ ಹೊರಾಟಗಾರ ಮಹದೇವ ತಳವಾರ ಮಾತನಾಡಿ, ಮಹಾತ್ಮಾ ಫುಲೆ ಆರೋಗ್ಯ ಯೋಜನೆ ಅನುಷ್ಠಾನಕ್ಕಾಗಿ ಗಡಿಭಾಗದಲ್ಲಿ ಕಚೇರಿ ಆರಂಭಿಸಿರುವಾಗ ಸರ್ಕಾರದಿಂದ ಯಾವುದೇ ಕ್ರಮವಿಲ್ಲ. ಕನ್ನಡ ನಾಮಫಲಕ ಹಾಕಿಸಲು ಹೋರಾಟ ಆರಂಭಿಸಿದರೆ ಪ್ರಕರಣ ದಾಖಲಿಸುತ್ತಾರೆ. ಇನ್ನು ಕನ್ನಡ ಮಾಧ್ಯಮಗಳ ಶಾಲೆಗಳಲ್ಲಿ ಕೊಠಡಿ ಕೊರತೆಯಿದೆ. ಅಲ್ಲದೇ ಸ್ಥಳೀಯ ಕನ್ನಡಪರ, ರೈತಪರ ಸಂಘಟನೆಗಳ ಜತೆ ಚರ್ಚಿಸಿ ಗಡಿ ಆಯೋಗದ ಪುನರ್ ರಚನೆ ಮಾಡುವಂತೆ ಒತ್ತಾಯಿಸಿದರು.

 

ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಮಾತನಾಡಿ, ಮಹಾತ್ಮಾ ಫುಲೆ ಆರೋಗ್ಯ ಯೋಜನೆಯನ್ನು ಗಡಿಭಾಗದ ಐದು ಜಿಲ್ಲೆಗಳಲ್ಲಿ ಮಹಾರಾಷ್ಟ್ರ ಸರ್ಕಾರ ಅನುಷ್ಠಾನ ಮಾಡುತ್ತಿದೆ. ಬೆಳಗಾವಿಯಲ್ಲಿ ಸೇವಾ ಕೇಂದ್ರಗಳನ್ನು ಆರಂಭಿಸುವ ಮೂಲಕ ಆಟಾಟೋಪ ಹಾಗೂ ಕುತಂತ್ರಗಳನ್ನು ಮಾಡಲಾಗುತ್ತಿದೆ. ಇಷ್ಟೆಲ್ಲ ಬೆಳವಣಿಗೆಯಾದರೂ ಸರ್ಕಾರ ಅಥವಾ ಆಯೋಗದ ವತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

ಮತ್ತೋರ್ವ ಕನ್ನಡ ಹೋರಾಟಗಾರ ದೀಪಕ ಗುಡಗನಟ್ಟಿ ಮಾತನಾಡಿ, ಆಯೋಗದ ವತಿಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ನಿಯಮಿತವಾಗಿ ಸಭೆಗಳನ್ನು ನಡೆಸಿದರೆ ಗಡಿಭಾಗದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಸಾಧ್ಯವಾಗುತ್ತದೆ. ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು. ಪದೇ ಪದೆ ಗಡಿಭಾಗದಲ್ಲಿ ಭಾಷಾದ್ವೇಷ ಮೂಡಿಸುತ್ತಿರುವ ಎಂಇಎಸ್ ಹಾಗೂ ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

 

ಸಭೆಯಲ್ಲಿ ಆಯೋಗದ ಸದಸ್ಯರಾದ ದಿನಕರ ದೇಸಾಯಿ, ಎಸ್.ಎಂ.ಕುಲಕರ್ಣಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ. ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಪಿ ರೋಹನ್ ಜಗದೀಶ್, ಮಹಾನಗರ ಪಾಲಿಕೆಯ ಆಯುಕ್ತರಾದ ಪಿ.ಎನ್.ಲೋಕೇಶ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಸೇರಿದಂತೆ ವಿವಿಧ ಕನ್ನಡಪರ ಸಂಘನೆಗಳ ಪದಾಧಿಕಾರಿಗಳು, ಕನ್ನಡ ಹೋರಾಟಗಾರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Back to top button