ರಾಜ್ಯಾದ್ಯಂತ ಪಂಚ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ: ಸಚಿವ ಸತೀಶ ಜಾರಕಿಹೊಳಿ

WhatsApp Group Join Now
Telegram Group Join Now

ಬೆಳಗಾವಿ, ಮಾ.12: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿ ರಾಜ್ಯವಾಗಿದೆ. ರಾಜ್ಯಾದ್ಯಂತ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.

ಬೆಳಗಾವಿ, ಹುಕ್ಕೇರಿ ತಾಲೂಕ ಆಡಳಿತ, ತಾಲೂಕ ಪಂಚಾಯತ ಮತ್ತು ಬೆಳಗಾವಿ ಹಾಗೂ ಹುಕ್ಕೇರಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ
ಭೂತರಾಮನಟ್ಟಿಯ ಮುಕ್ತಿಮಠದಲ್ಲಿ ಮಂಗಳವಾರ (ಮಾ.12) ನಡೆದ ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವ ಕುರಿತು ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆಯಡಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿ ಪದವಿಧರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ, ಡಿಪ್ಲೋಮಾ ಪದವಿದರಿಗೆ 1500 ರೂಪಾಯಿ ನೀಡಲಾಗುತ್ತಿದೆ.

ಅದೇ ರೀತಿಯಲ್ಲಿ ಅನ್ನಭಾಗ್ಯ ಯೋಜನೆ ಯೋಜನೆಯಡಿ ಪ್ರತಿ ಮಾಹೆ 5 ಕೆ.ಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಬದಲಿಗೆ ಡಿಬಿಟಿ ಮೂಲಕ ಹಣ ಜಮೆ, ಗೃಹ ಲಕ್ಷ್ಮೀ ಯೋಜನೆ ಮೂಲಕ ಪ್ರತಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ಹಾಗೂ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಸಾರ್ವಜನಿಕ ಸೌಲಭ್ಯಗಳನ್ನು ಒದಗಿಸುವತ್ತ ಸರ್ಕಾರ ಒತ್ತು ನೀಡುತ್ತಿದೆ. ಶಾಲಾ ದುರಸ್ತಿಗಳು, ಮುರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಲೋಕಾರ್ಪಣೆ, ಕೆರೆ ತುಂಬಿಸುವ, ಬ್ಯಾರೇಜ್, ಏತ ನೀರಾವರಿ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಯಮಕನಮರಡಿ ಮತಕ್ಷೇತ್ರದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ 100 ಸರ್ಕಾರಿ ಶಾಲೆಗಳನ್ನು ನೀಡಲಾಗಿದೆ.

ನಗರದಲ್ಲಿ 50 ಕೋಟಿ ವೆಚ್ಚದಲ್ಲಿ ಹೊಸ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ರಸ್ತೆ, ನೀರಾವರಿ ಯೋಜನೆ ಸೇರಿದಂತೆ ಮುಂಬರುವ ದಿನಗಳಲ್ಲಿ ಇನ್ನಷ್ಟು ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಸಬಲೀಕರಣ ಹೊಂದಬೇಕು. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಂಡು ಪ್ರತಿಯೊಬ್ಬರೂ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.

ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಡಿಸಿಪಿ ರೋಹನ್ ಜಗದೀಶ್, ಬೆಳಗಾವಿ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಬೆಳಗಾವಿ ತಹಶೀಲ್ದಾರ ಸಿದ್ದರಾಯ ಭೋಸಗಿ, ಆರ್.ಸಿ.ಯು ಕುಲಪತಿ ಪ್ರೊ.ತ್ಯಾಗರಾಜ, ರಿಜಿಸ್ಟರ್ ರಾಜಶ್ರೀ ಜೈನಾಪುರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ವಿವಿಧ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು. ವಿವಿಧ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಜನ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

 

 

WhatsApp Group Join Now
Telegram Group Join Now
Back to top button