ಸ್ಮಶಾನ ಭೂಮಿ ಅಭಿವೃದ್ಧಿಗೆ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

WhatsApp Group Join Now
Telegram Group Join Now

ಜಿಲ್ಲೆಯಲ್ಲಿರುವ ಸ್ಮಶಾನಗಳ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಗೊಳ್ಳಲು ಅನುಕೂಲವಾಗುವಂತೆ ಪ್ರತಿ ಸ್ಮಶಾನಕ್ಕೆ ತಲಾ ಐದು ಲಕ್ಷ ರೂಪಾಯಿಗಳಂತೆ ಜಿಲ್ಲೆಗೆ 2 ಕೋಟಿ ರೂಪಾಯಿ ಅನುದಾನ ಒದಗಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜ.05) ನಡೆದ ಜಿಲ್ಲಾ ದೌರ್ಜ್ಯನ್ಯ ತಡೆ ಹಾಗೂ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕಾರದಿಂದ ಅನುದಾನ ಬಿಡುಗಡೆಗೊಂಡರೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನರಿಗೆ ಸೇರಿದ ಜಿಲ್ಲೆಯ 40 ಸ್ಮಶಾನ ಭೂಮಿಗಳಲ್ಲಿ ಕುಡಿಯುವ ನೀರು, ತಂತಿ ಬೇಲಿ, ತಾತ್ಕಾಲಿಕ ಶೆಡ್ ನಿರ್ಮಾಣ ಮತ್ತಿತರ ಕಾಮಗಾರಿ ಕೈಗೊಳ್ಳಬಹುದು ಎಂದು ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಮುಖಂಡರಾದ ಮಲ್ಲೇಶ್ ಚೌಗಲೆ ಸರಕಾರದ ವಿವಿಧ ಯೋಜನೆಗಳಡಿ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಸುಗಮವಾಗಿ ಸಾಲ-ಸೌಲಭ್ಯಗಳನ್ನು ಒದಗಿಸಲು ಬ್ಯಾಂಕುಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸಂಬಂಧಿಸಿದಂತೆ ಬ್ಯಾಂಕುಗಳ ಪ್ರತಿನಿಧಿಗಳ ಸಭೆಯನ್ನು ಕರೆದು ಸೂಕ್ತ ಪರಿಶೀಲನೆ ನಡೆಸಲಾಗುವುದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಕೆಲವು ಪೊಲೀಸ್ ಅಧಿಕಾರಿಗಳು ಅಟ್ರಾಸಿಟಿ ಪ್ರಕರಣಗಳನ್ನು ಕೂಲಂಕುಶವಾಗಿ ಪರಿಶೀಲಿಸದೇ ಬಿ ರಿಪೋರ್ಟ್ ಹಾಕುವುದರಿಂದ ನೊಂದವರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಅಟ್ರಾಸಿಟಿ ಪ್ರಕರ‌ಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಸುವಾಗ ಮಾಮವೀಯತೆಯಿಂದ ಹಾಗೂ ಸೂಕ್ಷ್ಮ ರೀತಿಯಲ್ಲಿ ಪರಿಶೀಲಿಸಬೇಕು ಎಂದು ಚೌಗುಲೆ ಒತ್ತಾಯಿಸಿದರು.

ಅದೇ ರೀತಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಸಹಯೋಗದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಮಾಡಿಕೊಂಡರು.

ತಕ್ಷಣ ಪರಿಹಾರ ಬಿಡುಗಡೆಗೆ ಸೂಚನೆ:

ಪರಿಶಿಷ್ಟ ಜಾತಿ/ವರ್ಗದ ಜನರ ಮೇಲೆ ದೌರ್ಜನ್ಯ(ಅಟ್ರಾಸಿಟಿ) ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ನೊಂದವರಿಗೆ ಪರಿಹಾರ ನೀಡಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಯಾವುದೇ ಕಾರಣಕ್ಕೂ ಪ್ರಕರಣ ದಾಖಲಾದ 48 ಗಂಟೆ ಮೀರಬಾರದು. ಎರಡನೇ ಕಂತಿನ ಪರಿಹಾರ ದೋಷಾರೋಪ ಪಟ್ಟಿ ಸಲ್ಲಿಸಿದ ಬಳಿಕವೂ ತುರ್ತಾಗಿ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದರು.

ನಗರದ ಆರ್.ಪಿ.ಡಿ. ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರು ನಾಮಕರಣ ಮಾಡುವ ಕುರಿತು ಪಾಲಿಕೆಯ ಚುನಾಯಿತ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದರು.

 

ಜಿಲ್ಲೆಯಲ್ಲಿ ಎಸ್.ಸಿ.ಪಿ- ಟಿ.ಎಸ್.ಪಿ ಬಹಳಷ್ಟು ಯೋಜನೆಗಳು ಸಮರ್ಪಕ ಅನುಷ್ಠಾನಗೊಳ್ಳುತ್ತಿಲ್ಲ ಈ ಕುರಿತು ಕ್ರಮ ವಹಿಸಬೇಕು; ಪ್ರತಿ ತಿಂಗಳು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಸಭೆಗಳನ್ನು ಆಯೋಜಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಬೇಕು ಎಂದು ಜಿಲ್ಲಾ ಜಾಗೃತ ಸಮಿತಿಯ ಸದಸ್ಯ ಕರೆಪ್ಪ ಗುಡೆನ್ನವರ ಅವರು ವಿನಂತಿ ಮಾಡಿಕೊಂಡರು.

ಅಟ್ರಾಸಿಟಿ ಪ್ರಕರಣಗಳ ಸಮರ್ಪಕ ತನಿಖೆ; ಸಕಾಲದಲ್ಲಿ ಪರಿಹಾರ ಒದಗಿಸುವುದು; ಪರಿಶಿಷ್ಟ ಜಾತಿ-ಜನಾಂಗದ ಜನರಿಗೆ ಕಾನೂನು ಅರಿವು ಮೂಡಿಸುವುದು ಸೇರಿದಂತೆ ವಿವಿಧ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದ ಕರೆಪ್ಪ ಗುಡೆನ್ನವರ ಅವರು, ಸಂಕಷ್ಟಕ್ಕೆ ಸಿಲುಕುವ ಸಮಾಜದ ಮುಗ್ಧ ಜನರಿಗೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನಷ್ಟು ಮುತುವರ್ಜಿ ವಹಿಸಬೇಕು ಎಂದು ಮನವಿ ಮಾಡಿಕೊಂಡರು.

 

ಜಿಲ್ಲೆಯಲ್ಲಿನ ಸ್ಮಶಾನ ಭೂಮಿ ಅಭಿವೃದ್ಧಿಗೆ ಅನುದಾನ ಕೊರತೆಯಿದ್ದಲ್ಲಿ, ಅನುದಾನ ಒದಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ ಎಂದು ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು ತಿಳಿಸಿದರು.

 

ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಜನರು ಹೆಚ್ಚಾಗಿ ವಾಸವಿದ್ದು, ಪಂಚಾಯತ್ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನದಡಿ ತುರ್ತಾಗಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರು ರವೀಂದ್ರ ಗಡಾದಿ, ಡಿಸಿಪಿ ರೇವಣ್ಣ ಜಗದೀಶ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಜಾಗೃತ ಸಮಿತಿಯ ಸದಸ್ಯರಾದ ಕರೆಪ್ಪ ಗುಡೆನ್ನವರ,

ವಿಜಯ ಬಸಪ್ಪ ತಳವಾರ, ಜೀವನ ಮಾಂಜ್ರೇಕರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Back to top button