ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮತ್ತೆ ದಲಿತ ನಾಯಕರ ಸಭೆ; ಮೂವರು ಡಿಸಿಎಂ ನೇಮಕಕ್ಕೆ ಹೆಚ್ಚಿದ ಒತ್ತಡ
ಲೋಕೋಪಯೋಗಿ ಸಚಿವ ಹಾಗೂ ದಲಿತ ಮುಖಂಡ ಸತೀಶ ಜಾರಕಿಹೊಳಿ ಅವರ ನಿವಾಸದಲ್ಲಿ ಸಭೆ ನಡೆಯಿತು. ಗೃಹ ಸಚಿವ ಡಾ. ಜಿ ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ. ಎಚ್ಸಿ ಮಹದೇವಪ್ಪ, ಆಹಾರ ಸಚಿವ ಕೆಎಚ್ ಮುನಿಯಪ್ಪ ಹಾಗೂ ಸಹಕಾರ ಸಚಿವ ಕೆಎನ್ ರಾಜಣ್ಣ ಔತಣಕೂಟದ ಬಳಿಕ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇವರೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಳಯದಲ್ಲಿ ಗುರುತಿಸಿಕೊಂಡವರು. ಡಿಸಿಎಂ ಡಿಕೆ ಶಿವಕುಮಾರ್ ಪ್ರಭಾವವನ್ನು ಕಡಿಮೆ ಮಾಡಲು ರಣತಂತ್ರ ರೂಪಿಸಲು ಈ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಡಿಕೆ ಶಿವಕುಮಾರ್ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ವಲಯದ ಮೂಲಕ ಹೆಚ್ಚು ಡಿಸಿಎಂ ಹುದ್ದೆ ರಚಿಸುವ ವಿಷಯವನ್ನು ಚಾಕಚಕ್ಯತೆಯಿಂದ ಮುನ್ನೆಲೆಗೆ ತಂದಿದ್ದಾರೆ ಎನ್ನಲಾಗಿದೆ. ಈ ನಡೆಯು ಈಗಿರುವ ಸ್ಥಾನವನ್ನು ಉಳಿಸಿಕೊಳ್ಳಲು ಡಿಕೆ ಶಿವಕುಮಾರ್ ಅವರಿಗೆ ಸವಾಲಾಗಿ ಪರಿಣಮಿಸಲಿದೆ.
ಗುರುವಾರ ತಡರಾತ್ರಿವರೆಗೂ ಸಭೆ ನಡೆದಿದ್ದು, ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿಸಿ ಅದರಲ್ಲಿ ಒಂದನ್ನು ದಲಿತ ಸಮುದಾಯಕ್ಕೆ ನೀಡುವ ಕುರಿತು ಹೈಕಮಾಂಡ್ ಮುಂದೆ ಬೇಡಿಕೆ ಇಡಲು ಮುಖಂಡರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.